ಮುಂಬೈ 26/11 ಭಯೋತ್ಪಾದನಾ ದಾಳಿಯ ಸಂಚುಕೋರ ಮತ್ತು ಲಷ್ಕರ್-ಎ-ತೈಬಾ (ಎಲ್ಇಟಿ) ಹಫೀಜ್ ಅಬ್ದುಲ್ ರಹಮಾನ್ ಮಕ್ಕಿ ಇಂದು ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಕುರಿತು ಇಂಡಿಯಾ ಟುಡೇ ವರದಿ ಮಾಡಿದ್ದು, ಮಕ್ಕಿ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಲಾಹೋರ್ನ ಖಾಸಗಿ ಆಸ್ಪತ್ರೆಯಲ್ಲಿ ಶುಗರ್ ಮಟ್ಟ ಹೆಚ್ಚಿದ್ದ ಕಾರಣ ಚಿಕಿತ್ಸೆ ಪಡೆಯುತ್ತಿದ್ದ ಎಂಬುದು ತಿಳಿದುಬಂದಿದೆ. ಮೇ 2019 ರಲ್ಲಿ, ಮಕ್ಕಿಯನ್ನು ಪಾಕಿಸ್ತಾನ ಸರ್ಕಾರವು ಬಂಧಿಸಿತು ಮತ್ತು ಲಾಹೋರ್ನಲ್ಲಿ ಗೃಹಬಂಧನದಲ್ಲಿ ಇರಿಸಲಾಯಿತು. 2020 ರಲ್ಲಿ, ಪಾಕಿಸ್ತಾನಿ ನ್ಯಾಯಾಲಯವು ಭಯೋತ್ಪಾದನೆಗೆ ಹಣಕಾಸು ಒದಗಿಸುವ ಪ್ರಕರಣಗಳಲ್ಲಿ ಆತನನ್ನು ದೋಷಿ ಎಂದು ಘೋಷಿಸಿತು. ಅವನಿಗೆ ಜೀವಾವಧಿ ಶಿಕ್ಷೆ ವಿಧಿಸಿತು. 2023 ರ ಜನವರಿಯಲ್ಲಿ, ಮಕ್ಕಿಯನ್ನು ವಿಶ್ವಸಂಸ್ಥೆಯ ಭದ್ರತಾ ಮಂಡಳಿ (UNSC) ಜಾಗತಿಕ ಭಯೋತ್ಪಾದಕ ಎಂದು ಘೋಷಿಸಿತು. 166 ಜನರ ಸಾವಿಗೆ ಕಾರಣವಾದ 26/11 ಮುಂಬೈ ಭಯೋತ್ಪಾದಕ ದಾಳಿಗೆ ಹಣಕಾಸು ಒದಗಿಸುವಲ್ಲಿ ಮಕ್ಕಿ ಭಾಗಿಯಾಗಿದ್ದ. ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಒಟ್ಟು ಒಂಬತ್ತು ಭಯೋತ್ಪಾದಕರು ಸಹ ಕೊಲ್ಲಲ್ಪಟ್ಟರು ಮತ್ತು ಒಬ್ಬ ಭಯೋತ್ಪಾದಕ ಅಮೀರ್ ಅಜ್ಮಲ್ ಕಸಬ್ ಜೀವಂತವಾಗಿ ಸಿಕ್ಕಿಬಿದ್ದಿದ್ದಾನೆ. ಮುಂಬೈ ಭಯೋತ್ಪಾದನಾ ದಾಳಿಯ ಹೊರತಾಗಿ , ಮಕ್ಕಿ ಅವರು ಕೆಂಪು ಕೋಟೆ ದಾಳಿಯಲ್ಲಿ ಭಾಗಿಯಾಗಿದ್ದಕ್ಕಾಗಿ ಭದ್ರತಾ ಏಜೆನ್ಸಿಗಳಿಂದ ಭಾರತದಲ್ಲಿ ವಾಂಟೆಡ್ ಭಯೋತ್ಪಾದಕನಾಗಿದ್ದ.
0 Comments