*ಮಂಗಳೂರು:* ಉಳ್ಳಾಲ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣ ಕರ್ನಾಟಕದಾದ್ಯಂತ ಭಾರೀ ಸಂಚಲನ ಸೃಷ್ಟಿಸಿತ್ತು. ಇದೀಗ ಮೂವರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಪೊಲೀಸರು ಚಿನ್ನಾಭರಣಗಳನ್ನೂ ವಶಪಡಿಸಿಕೊಂಡಿದ್ದಾರೆ. ಈ ನಡುವೆ, ಪ್ರಕರಣದ ತನಿಖೆ ನಡೆಸುತ್ತಿದ್ದಾಗ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದೆ. ರಾಜ್ಯಾದ್ಯಂತ ಸಾವಿರಾರು ವಾಹನಗಳು ನಕಲಿ ನಂಬರ್ ಪ್ಲೇಟ್ ಅಳವಡಿಸಿ ಓಡಾಡುತ್ತಿವೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಬ್ಯಾಂಕ್ ದರೋಡೆ ಮಾಡಿದ ದರೋಡೆಕೋರರು ಫಿಯೆಟ್ ಕಾರಿನಲ್ಲಿ ತಲಪಾಡಿ ಟೋಲ್ ಮೂಲಕ ತೆರಳಿದ್ದಾರೆ ಎಂಬುದು ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಇನ್ನೊಂದು ಕಾರ್ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳದ ಬ್ರಹ್ಮರಕೂಟ್ಲು ಟೋಲ್ ಗೇಟ್ನಿಂದ ಪಾಸಾಗಿದೆ ಎಂಬ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದರು. ಆಗ ಸಿಕ್ಕಿದ್ದೇ, ನಕಲಿ ನಂಬರ್ ಪ್ಲೇಟ್ನ ಹತ್ತಾರು ವಾಹನಗಳು ಟೋಲ್ ಗೇಟ್ ಮೂಲಕ ಪಾಸಾಗಿವೆ ಎಂಬ ಸ್ಫೋಟಕ ಮಾಹಿತಿ.ಬ್ರಹ್ಮರಕೂಟ್ಲು ಟೋಲ್ ಗೇಟ್ನಲ್ಲಿ ಬ್ಯಾಂಕ್ ದರೋಡೆಕೋರರು ಪಾಸಾಗಿದ್ದಾರೆಂಬ ಶಂಕೆಯಿಂದ ಪರಿಶೀಲಿಸಿದ್ದರೂ, ಅವರು ಸರ್ವಿಸ್ ರಸ್ತೆಯ ಮೂಲಕ ತೆರಳಿದ್ದಾರೆ ಎಂಬುದು ಬಳಿಕ ಗೊತ್ತಾಗಿದೆ. ಆದರೆ, ಆ ಟೋಲ್ ಗೇಟ್ನ ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಕಾರು, ಟೆಂಪೋ ಟ್ರಾವೆಲ್ಲರ್, ಲಾರಿ ಸೇರಿದಂತೆ ಹತ್ತಾರು ವಾಹನಗಳು ಫೇಕ್ ನಂಬರ್ ಪ್ಲೇಟ್ ಅಳವಡಿಸಿರುವುದು ಬೆಳಕಿಗೆ ಬಂದಿದೆ. ಅಂದರೆ ವಾಹನದಲ್ಲಿ ಇರುವ ನಂಬರೇ ಬೇರೆ, ಫಾಸ್ಟ್ ಟ್ಯಾಗ್ ರೀಡ್ ಮಾಡುವ ನಂಬರೇ ಬೇರೆ!
0 Comments