*ನವದೆಹಲಿ:* ಕರ್ನಾಟಕ ಬಿಜೆಪಿಯಲ್ಲಿ ಮನೆಯೊಂದು ಮೂರು ಬಾಗಿಲು ಎನ್ನುವಂತಾಗಿದೆ. ಕರ್ನಾಟಕ ಬಿಜೆಪಿಯಲ್ಲಿ ಸ್ಪಷ್ಟವಾಗಿ ಎರಡು ಬಣಗಳು ಸೃಷ್ಟಿಯಾಗಿವೆ. ಒಂದು ಬಣ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ನೇರವಾಗಿ ವಾಗ್ದಾಳಿ ನಡೆಸಿದರೆ, ಮತ್ತೊಂದು ಬಣ ವಿಜಯೇಂದ್ರ ಪರವಾಗಿ ಗಟ್ಟಿಯಾಗಿ ನಿಂತಿದೆ. ವಿಜಯೇಂದ್ರ ವಿರುದ್ಧದ ಬಣದಲ್ಲಿ ಸಂಘಟನಾ ಚತುರ ಎಂದು ಕರೆಸಿಕೊಳ್ಳುವ ಅರವಿಂದ ಲಿಂಬಾವಳಿ ಗುರುತಿಸಿಕೊಂಡಿದ್ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿಯಾಗಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ದೆಹಲಿಯಲ್ಲಿ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ಸುದೀರ್ಘ ಕಾಲ ಚರ್ಚೆ ಮಾಡಿದ್ದಾರೆ. ಭೇಟಿ ವೇಳೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಬಿವೈ ವಿಜಯೇಂದ್ರ ಅವರನ್ನು ಕೂಡಲೇ ಬದಲಾವಣೆ ಮಾಡಬೇಕು. ಇಲ್ಲದಿದ್ದರೆ, ರಾಜ್ಯ ಘಟಕದ ಅಧ್ಯಕ್ಷರ ಆಯ್ಕೆಯ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸುವುದು ಶತಃಸಿದ್ಧ ಎಂದು ಹೇಳಿದ್ದಾರೆ ಎನ್ನಲಾಗಿದೆ. ಸದ್ಯದಲ್ಲೇ ರಾಜ್ಯ ಬಿಜೆಪಿ ಘಟಕಕ್ಕೆ ಚುನಾವಣೆ ನಡೆಯಲಿದ್ದು ವಿಜಯೇಂದ್ರ ಮುಂದುವರೆಯಬಾರದು ಎಂಬ ಮನವಿ ಮಾಡಿದ್ದಾರೆ. ರಾಜ್ಯ ಬಿಜೆಪಿ ಘಟಕದಲ್ಲಿ ಉಂಟಾಗಿರುವ ಗೊಂದಲ, ಅದಕ್ಕೆ ಕಾರಣಗಳ ಬಗ್ಗೆ ವರಿಷ್ಠರಿಗೆ ಮಾಹಿತಿ ನೀಡಿದ್ದಾರೆ. ವರಿಷ್ಠರು ಕೂಡಲೇ ಮಧ್ಯಪ್ರವೇಶ ಮಾಡದಿದ್ದರೆ ಭಿನ್ನಮತ ಇನ್ನಷ್ಟು ತೀವ್ರವಾಗಲಿದೆ ಎಂಬುದನ್ನು ನಡ್ಡಾ ಅವರ ಗಮನಕ್ಕೆ ಲಿಂಬಾವಳಿ ತಂದಿದ್ದಾರೆ. ವಿಜಯೇಂದ್ರ ವಿರುದ್ಧ ಅರವಿಂದ್ ಲಿಂಬಾವಳಿ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಲಿಂಬಾವಳಿ ಹೇಳಿದ್ದನ್ನು ತಾಳ್ಮೆಯಿಂದ ಕೇಳಿಸಿಕೊಂಡ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಎಲ್ಲವನ್ನು ಹೈಕಮಾಂಡ್ ನಾಯಕರು ಗಮಿಸುತ್ತಿದ್ದಾರೆ. ಎಲ್ಲಾ ಗೊಂದಲಗಳಿಗೂ ಫುಲ್ ಸ್ಟಾಪ್ ಹಾಕಲಿದ್ದಾರೆ ಎಂದಿದ್ದಾರೆ.
0 Comments