*ಮೈಸೂರು:* ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರು ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ಜನಾಕ್ರೋಶ ಯಾತ್ರೆ ಮಾಡುತ್ತಿದ್ದು ರಾಜ್ಯದ ಜನರು ಇದನ್ನು ಒಪ್ಪುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಪಟ್ಟಣದ ಪುರಸಭೆ ಬಯಲು ರಂಗಮಂದಿರ ಆವರಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿನಿಂದ ಶುಕ್ರವಾರ ಆಯೋಜಿಸಿದ್ದ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ₹513 ಕೋಟಿ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದರಿಂದ ಅಭಿವೃದ್ಧಿ ಕಾರ್ಯಗಳಿಗೆ ಈ ಸರ್ಕಾರದ ಬಳಿ ಹಣವಿಲ್ಲ ಎಂದು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಟೀಕಿಸುತ್ತಿವೆ. ಪಾಪರ್ ಸರ್ಕಾರವಾಗಿದ್ದರೆ 513 ಕೋಟಿ ರೂ.ಗಳ ಕಾಮಗಾರಿಗಳನ್ನು ಇಲ್ಲಿ ಕೈಗೊಳ್ಳಲು ಸಾಧ್ಯವಾಗುತ್ತಿತ್ತೇ? ಬಿಜೆಪಿ ಮತ್ತು ಜೆಡಿಎಸ್ ಅಧಿಕಾರದಲ್ಲಿದ್ದಾಗ ಏನೂ ಮಾಡಲಿಲ್ಲ. ಆದರೆ ಟೀಕೆ ಮಾಡುವುದನ್ನು ಹಾಗೂ ಸುಳ್ಳು ಹೇಳುವುದನ್ನು ಮಾತ್ರ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ಜೆಡಿಎಸ್ ಪಕ್ಷಗಳು ಹೇಳಿಕೊಂಡಿರುವ ಚಾರ್ಜ್ ಶೀಟ್ ನಲ್ಲಿ ಬರೀ ಸುಳ್ಳುಗಳನ್ನೇ ಹೇಳಿದ್ದಾರೆ. ಹೀಗೆ ಅವರಿಗೆ ಸುಳ್ಳು ಹೇಳಲು ನಾಚಿಕೆಯಾಗುವುದಿಲ್ಲವೇ? ಆರ್.ಅಶೋಕ್, ಹೆಚ್. ಡಿ. ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ, ವಿಜಯೇಂದ್ರ, ಛಲವಾದಿ ನಾರಾಯಣಸ್ವಾಮಿ ಇವರೆಲ್ಲರೂ ಬಹಳ ವರ್ಷಗಳಿಂದ ರಾಜಕೀಯದಲ್ಲಿದ್ದು, ಸುಳ್ಳು ಹೇಳುವುದರಲ್ಲಿ ಪರಿಣಿತಿ ಹೊಂದಿದ್ದಾರೆ. ಪಂಚ ಗ್ಯಾರಂಟಿ ಯೋಜನೆಗಳನ್ನು ನಮ್ಮ ಸರ್ಕಾರ ಜಾರಿ ಮಾಡಿದೆ. ಜನರು ಈ ಯೋಜನೆಗಳ ಸದುಪಯೋಗಪಡಿಸಿಕೊಳ್ಳುತ್ತಿರುವಾಗ ಜಾರಿ ಮಾಡಿಲ್ಲ ಎಂದು ಹೇಗೆ ಹೇಳುತ್ತಾರೆ? ರಾಜ್ಯದ 3.50 ಕೋಟಿ ಮಹಿಳೆಯರು ಯಾವುದೇ ಬೇಧ ಭಾವವಿಲ್ಲದೇ ಶಕ್ತಿ ಯೋಜನೆಯನ್ನು ಬಳಸಿಕೊಂಡಿದ್ದಾರೆ. ಬಿಜೆಪಿ ಸರ್ಕಾರ ಇಂಥ ಯೋಜನೆಯನ್ನು ಜಾರಿ ಮಾಡಿತ್ತೇ? ಈವರೆಗೆ 500 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಓಡಾಡಿದ್ದಾರೆ. ಪ್ರತಿ ದಿನ 50-60 ಲಕ್ಷ ಮಹಿಳೆಯರು ಇದರ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಯೋಗೇಶ್ ಶಿರೂರು
0 Comments